ಪುಟ:ಕರ್ನಾಟಕ ಗತವೈಭವ.djvu/೪೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ



೧೮

ಕರ್ನಾಟಕ ಗತವೈಭವ


ಭಾವಿಸುವರು, ಈಗಿನ ಮಹಾರಾಷ್ಟ್ರದ ಪೂರ್ವಕ್ಕೆ ತೆಲುಗು ದೇಶದಲ್ಲಿ ಗೋದಾವರಿಯ ತೀರದವರೆಗೆ ಕನ್ನಡನಾಡು ಹಿಂದಕ್ಕೆ ಹಬ್ಬಿದ್ದರೂ ಹಬ್ಬಿರಬಹುದು; ಮಹಾರಾಷ್ಟ್ರದಲ್ಲಿ ಮಾತ್ರ ಕನ್ನಡ ಪ್ರದೇಶವಿರಲಿಲ್ಲವೆಂದು ಅನೇಕರು ಇನ್ನೂ ನಂಬುತ್ತಾರೆ, ಆದರೆ ಈ ವಿಷಯವನ್ನು ಚೆನ್ನಾಗಿ ಅಭ್ಯಾಸಮಾಡಿದ ನಮ್ಮ ಪರಮ ಸ್ನೇಹಿತರಾದ ಶ್ರೀ ನಾರಾಯಣ ಶ್ರೀನಿವಾಸ ರಾಜಪುರೋಹಿತ ಇವರು 'ಜ್ಞಾನೇಶ್ವರಿ'ಯಲ್ಲಿ ಕನ್ನಡ ಶಬ್ದಗಳು ತುಂಬಿರುತ್ತವೆಂದೂ, ಗೋವೆಯಲ್ಲಿಯ ಲೆಖ್ಖ ಪತ್ರಗಳು ಮೊನ್ನೆ ಮೊನ್ನಿನ ವರೆಗೆ ಕನ್ನಡದಲ್ಲಿಯೇ ಇದ್ದುವೆಂದೂ, ಪಂಢರಪುರದ ಶ್ರೀ ವಿಠಲನು ಮುಖ್ಯವಾಗಿ ಕನ್ನಡಿಗರ ದೇವತೆಯೇ ಎಂದೂ, ಪಂಢರಪುರದ ಸುತ್ತಲಿನ ಪ್ರದೇಶವು ಕನ್ನಡವೇ ಎಂದೂ, ಈಗ ನಾಲೈದು ವರ್ಷಗಳ ಕೆಳಗೆಯೇ ಮರಾಠಿ ಭಾಷೆಯಲ್ಲಿ ಪ್ರಕಟವಾಗುತ್ತಿರುವ ಪ್ರಸಿದ್ಧ 'ಕೇಸರೀ' ಪತ್ರದಲ್ಲಿ 'महाराष्ट्र व करनाटक्' ಎಂಬ ಲೇಖಮಾಲೆಯಲ್ಲಿ ಸಪ್ರಮಾಣವಾಗಿ ಸಾಧಿಸಿರುವರು. ಆದರೆ ಇದೇ ವಿಷಯವನ್ನು ವ್ಯಾಸಂಗ ಮಾಡುತ್ತಿರುವಾಗ, ನಮಗೆ ಗೊತ್ತಾದ ಕೆಲವು ಮಹತ್ವದ ಸಂಗತಿಗಳನ್ನು ಇಲ್ಲಿ ನಾವು ಹೇಳುವೆವು. ಇತಿಹಾಸ ಸಂಶೋಧಕರು ಆ ಮಾರ್ಗದಿಂದ ಮುಂದೆ ಸಾಗಿ, ಹೆಚ್ಚಿನ ಶೋಧಗಳನ್ನು ಮಾಡಿ, ಈಗಿನ ಮಹಾರಾಷ್ಟ್ರ ಭಾಷೆಯ ನಾಡಿನಲ್ಲಿ, ಕನ್ನಡಿಗರ ರಾಜ್ಯ ವಿಸ್ತಾರ ವಿದ್ದುದಲ್ಲದೆ, ಕನ್ನಡ ಭಾಷಾ ವಿಸ್ತಾರವು ಕೂಡ ಇತ್ತೆಂಬ ನಮ್ಮ ವಿಧಾನವನ್ನು ಹೆಚ್ಚಿಗೆ ಬಲಪಡಿಸಬೇಕೆಂದು ಪ್ರಾರ್ಥನೆ. ನಮಗೆ ಗೊತ್ತಾದ ಸಂಗತಿಗಳು ಯಾವುವೆಂದರೆ:- (೧) ಮಹಾರಾಷ್ಟ್ರ ಭಾಷೆಯಲ್ಲಿ ಊರಿನ ಹೆಸರುಗಳು ಬಹುತರವಾಗಿ ಕನ್ನಡದ ಹೆಸರುಗಳೇ ಇರುತ್ತವೆಂಬುದನ್ನು ಕೇಳಿ, ಕನ್ನಡಿಗರಿಗೆ ಆನಂದವೂ ಆಶ್ಚರ್ಯವೂ ಆಗದಿರದು. 'ಕೆಂದೂರು' ಎಂಬ ಶುದ್ಧ ಕನ್ನಡ ಹೆಸರಿನ ಊರು, ಪುಣೆಯ ಹತ್ತಿರ ಇರುತ್ತದೆ. ಇದಲ್ಲದೆ, ಠಾಣಾ, ಕುಲಾಬಾ, ರತ್ನಾಗಿರಿ ಮುಂತಾದ ಮರಾಠಿ ಜಿಲ್ಲೆಗಳಲ್ಲಿಯೂ, ಕನ್ನಡ ಹೆಸರಿನ ಗ್ರಾಮಗಳು ತುಂಬಿರುತ್ತವೆ, ಉದಾಹರಣೆಗಾಗಿ- ಪೊಯನಾಡು, ಶಿರೋಳ, ಕಲ್ಲಮಠ, ದೇವರಕೊಪ್ಪ, ಅಕ್ಕಲಕೊಪ್ಪ, ಉಳವಿ, ಅತ್ತಿಗೆರೆ, ಮೊಸಳೆ, ನೇರೂರು, ಪಾಳೆ, ದೇವೂರು, ಡೋಣಿ, ನಿರ್ಗುಡ, ಕಣಕವಲ್ಲಿ, ಬ್ರಮನಾಳ, ಗಾಣಗಾಪೂರ, ಕುರಡೀವಾಡೀ, ಕಳಸ, ಇವೇ ಮುಂತಾದ ಗ್ರಾಮಗಳು ಮಹಾರಾಷ್ಟ್ರದಲ್ಲಿ ಕಂಡುಬರುತ್ತವೆ. ಮಹಾ