ಆಚಾರಲಿಂಗಾನುಭಾವದಿಂದ ಪೃಥ್ವಿಯ ಪೂರ್ವಾಶ್ರಯವನಳಿದ
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಆಚಾರಲಿಂಗಾನುಭಾವದಿಂದ ಪೃಥ್ವಿಯ ಪೂರ್ವಾಶ್ರಯವನಳಿದ ಸದಾಚಾರನಿಷ್ಠನ ನೋಡಾ! ಸದ್ಗುರುರತಿಯಿಂದ ಅಪ್ಪುತತ್ವದ ಪೂರ್ವಾಶ್ರಯವನಳಿದು ಸದ್ಗುರುನಿಷ್ಠನ ನೋಡಾ! ಶಿವಲಿಂಗದ ಸಂಗದಿಂದ ಅಗ್ನಿಯ ಪೂರ್ವಾಶ್ರಯವನಳಿದ ಶಿವಲಿಂಗಪ್ರೇಮಿಯಾದ ಶಿವಾಚಾರನಿಷ್ಠನ ನೋಡಾ! ಚರಲಿಂಗದ ಸಂಗದಿಂದ ವಾಯುವಿನ ಪೂರ್ವಾಶ್ರಯವನಳಿದ ಜಂಗಮಲಿಂಗಗ್ರಾಹಕನ ನೋಡಾ! ಪ್ರಸಾದಲಿಂಗದ ಸೇವಕತ್ವದಿಂದ ಕರ್ಮತ್ರಯವನಳಿದ ನಿರ್ಮಲ ನಿರಾವರಣನ ನೋಡಾ! ಮಹಾಲಿಂಗದ ಸಂಗದಿಂದ ಜೀವಭಾವವಳಿದ ಮಹಾಮಹಿಮನ ನೋಡಾ! ಲಿಂಗನಿಷ್ಠೆಯಿಂದ ಅಂಗಗುಣಂಗಳೆಲ್ಲವ ಕಳೆದುಳಿದ ನಿರಂಗಸಂಗಿಯ ನೋಡಾ! ಇಂತಪ್ಪ ಮಹೇಶ್ವರಂಗೆ ನಮೋನಮೋಯೆಂಬೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.