ಉಪಮೆ ಉಪಮಿಸಲರಿಯದೆ ಉಪಮಾತೀತವೆನುತ್ತಿದ್ದಿತ್ತು.

ವಿಕಿಸೋರ್ಸ್ದಿಂದ



Pages   (key to Page Status)   


ಉಪಮೆ ಉಪಮಿಸಲರಿಯದೆ ಉಪಮಾತೀತವೆನುತ್ತಿದ್ದಿತ್ತು. ಅರಿವು
ಅರಿವಿನ ಮರೆಯಲ್ಲಿರ್ದುದನರಿಯಲರಿಯದೆ
ಪರಾಪರವೆಂದು ನುಡಿಯುತ್ತಿದ್ದಿತ್ತು. ಧ್ಯಾನ ಧ್ಯಾನಿಸಲರಿಯದೆ
ಧ್ಯಾನರೂಪಾತೀತನೆಂದು
ತದ್ಧ್ಯಾನಗೊಂಡಿತ್ತು. ಜ್ಞಾತೃ ಜ್ಞಾನ ಜ್ಞೇಯಕ್ಕೆ ಇನ್ನಾವ ಜ್ಞಾನವೊ? ವೇದವಿಜ್ಞಾನವೆಂದುದಾಗಿ
`ತತ್ತ್ವಮಸಿ' ವಾಕ್ಯಂಗಳೆಲ್ಲವೂ ಹುಸಿಯಾಗಿ ಹೋದವು. ಸಚ್ಚಿದಾನಂದವೆಂದುದಾಗಿ ದ್ವೈತಾದ್ವೈತಿಗಳೆಲ್ಲ ಸಂಹಾರವಾಗಿ ಹೋದರು. ಬಂದೂ ಬಾರದ
ನಿಂದ ನಿರಾಳ ಗುಹೇಶ್ವರ.