ವಿಷಯಕ್ಕೆ ಹೋಗು

ಕನ್ನಡವೇ ಸತ್ಯ - ಎಲ್ಲಾದರು ಇರು ಎಂತಾದರು ಇರು

ವಿಕಿಸೋರ್ಸ್ದಿಂದ

ಕವಿ: ಕುವೆಂಪು

ಗಾಯನ: ಡಾ. ರಾಜ್‍ಕುಮಾರ್

ಸಂಕಲನ / ಧ್ವನಿಸುರುಳಿ: ಕನ್ನಡವೇ ಸತ್ಯ

ಸಂಗೀತ: ಸಿ.ಅಶ್ವಥ್


ಎಲ್ಲಾದರು ಇರು ಎಂತಾದರು ಇರು ||೨||

ಎಂದೆಂದಿಗೂ ನೀ ಕನ್ನಡವಾಗಿರು

ಕನ್ನಡವೇ ಸತ್ಯ, ಕನ್ನಡವೇ ನಿತ್ಯ


ಕನ್ನಡ ಗೋವಿನ ಓ ಮುದ್ದಿನ ಕರು ||೨||

ಕನ್ನಡತನ ಒಂದಿದ್ದರೆ, ಅಮ್ಮಗೆ ಕಲ್ಪತರು

ಕನ್ನಡವೇ ಸತ್ಯ, ಕನ್ನಡವೇ ನಿತ್ಯ

ಎಲ್ಲಾದರು ಇರು ಎಂತಾದರು ಇರು

ಎಂದೆಂದಿಗೂ ನೀ ಕನ್ನಡವಾಗಿರು


ನೀ ಮೆಟ್ಟುವ ನೆಲ, ಅದೆ ಕರ್ನಾಟಕ

ನೀನೇರುವ ಮಲೆ ಸಹ್ಯಾದ್ರಿ

ನೀ ಮೆಟ್ಟುವ ನೆಲ, ಅದೆ ಕರ್ನಾಟಕ

ನೀನೇರುವ ಮಲೆ ಸಹ್ಯಾದ್ರಿ


ನೀ ಮುಟ್ಟುವ ಮರ ಶ್ರೀಗಂಧದ ಮರ ||೨||

ನೀ ಕುಡಿಯುವ ನೀರ್ ಕಾವೇರಿ


ಪಂಪನ ಓದುವ ನಿನ್ನಾ ನಾಲಗೆ

ಕನ್ನಡವೇ ಸತ್ಯ

ಕುಮಾರವ್ಯಾಸನ ಆಲಿಪ ಕಿವಿಯದು

ಕನ್ನಡವೇ ನಿತ್ಯ


ಎಲ್ಲಾದರು ಇರು ಎಂತಾದರು ಇರು

ಎಂದೆಂದಿಗೂ ನೀ ಕನ್ನಡವಾಗಿರು


ಹರಿಹರ ರಾಘವರಿಗೆ ಎರಗುವ ಮನ

ಹಾಳಾಗಿಹ ಹಂಪೆಗೆ ಕೊರಗುವ ಮನ

ಹರಿಹರ ರಾಘವರಿಗೆ ಎರಗುವ ಮನ

ಹಾಳಾಗಿಹ ಹಂಪೆಗೆ ಕೊರಗುವ ಮನ


ಬೆಳ್ಗೊಳ ಬೇಲೂರ್‍ಗಳ ನೆನೆಯುವ ಮನ


ಮಲೆನಾಡಿಗೆ ಹೊಂಪುಳಿ ಹೋಗುವ ಮನ

ಕಾಜಾಣಕೆ ಗಿಳಿ, ಕೋಗಿಲೆ ಇಂಪಿಗೆ

ಮಲ್ಲಿಗೆ ಸಂಪಿಗೆ ಕೇದಗೆ ಸೊಂಪಿಗೆ

ಕಾಜಾಣಕೆ ಗಿಳಿ, ಕೋಗಿಲೆ ಇಂಪಿಗೆ

ಮಲ್ಲಿಗೆ ಸಂಪಿಗೆ ಕೇದಗೆ ಸೊಂಪಿಗೆ


ಮಾವಿನ ಹೊಂಗೆಯ ತಳಿರಿನ ತಂಪಿಗೆ


ರೋಮಾಂಚನಗೊಳುವಾ ತನು ಮನ

ಕನ್ನಡವೇ ಸತ್ಯ, ಕನ್ನಡವೇ ನಿತ್ಯ

ಎಲ್ಲಾದರು ಇರು ಎಂತಾದರು ಇರು

ಎಂದೆಂದಿಗು ನೀ ಕನ್ನಡವಾಗಿರು


ಎಲ್ಲಿದ್ದರೆ ಏನ್ ಎಂತಿದ್ದರೆ ಏನ್

ಎಲ್ಲಿದ್ದರೆ ಏನ್ ಎಂತಿದ್ದರೆ ಏನ್


ಎಂದೆಂದಿಗು ತಾನ್ ಕನ್ನಡವೇ ಸತ್ಯ ಕನ್ನಡವೇ ನಿತ್ಯ

ಅನ್ಯವೆನಲದೆ ಮಿಥ್ಯ