ದೇವರ ಪೂಜಿಸಿ, ಕಾಯಗೊಂಡು

ವಿಕಿಸೋರ್ಸ್ದಿಂದ



Pages   (key to Page Status)   


ದೇವರ ಪೂಜಿಸಿ
ಕಾಯಗೊಂಡು ಹುಟ್ಟಿ
ಪುತ್ರ ಮಿತ್ರ ಕಳತ್ರತ್ರಯ ಧನಧಾನ್ಯ ಷಡುಚಂದನಾದಿ ಭೋಗಾದಿಭೋಗಂಗಳ ಪಡೆದು ಭೋಗಿಸಿ ಸುಖಿಸಿಹೆನೆಂಬೆಯೆಲೆ ಮರುಳು ಮಾನವ
ಕಾಯವೇ ದುಃಖದಾಗರವೆಂದು ಅರಿಯೆಯಲ್ಲ? ಕಾಯವೇ ಸಕಲಧರ್ಮಕರ್ಮಕ್ಕಾಶ್ರಯವೆಂದರಿಯೆಯಲ್ಲ? ಪುಣ್ಯ ಪಾಪವಶದಿಂದ ಸ್ವರ್ಗನರಕಕ್ಕೆಡೆಯಾಡುತ್ತಿಪ್ಪುದನರಿಯೆಯಲ್ಲ? ಹುಟ್ಟುವುದು ಮಹಾದುಃಖ; ಹುಟ್ಟಿ ಸಂಸಾರಶರಧಿಯೊಳು ಬದುಕುವುದು ದುಃಖ. ಸಾವ ಸಂಕಟವನದ ನಾನೇನೆಂಬೆನಯ್ಯಾ
ಅದು ಅಗಣಿತ ದುಃಖ. ಆವಾವ ಪರಿಯಲ್ಲಿ ತಿಳಿದುನೋಡಲು
ಈ ಮೂರು ಪರಿಯ ದುಃಖ ಮುಖ್ಯವಾದ ಅನಂತ ದುಃಖ ನೋಡಾ. ಈ ಕಾಯದ ಕಂಥೆಯ ತೊಟ್ಟು ಕರ್ಮದೊಳಗಿರದೆ
ಮಾಯಾಮೋಹನ ತಾಳ್ದು ಮತ್ತನಾಗಿರದೆ
ಪಂಚೇಂದ್ರಿಯಂಗಳ ಸುಖಕ್ಕೆ ಮೆಚ್ಚಿ ಮರುಳಾಗದೆ
ಪಂಚವದನನ ನೆನೆನೆನೆದು ಸಂಸಾರಪ್ರಪಂಚವ ತಪ್ಪಿಸಿಕೊಂಬ ಸುಬುದ್ಧಿಯ ಕಲಿಸಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.