ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೯೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಪ್ರಾಣಿ ಕಥೆಗಳು

೧೬೯

ಹೇಳಿತು. ಅದನ್ನು ಕೇಳಿ, ನಡೆದಂಥ ಲಗ್ನಬಿಡಿಸಿ ನಾಗೇಂದ್ರನಿಗೆ ಮಗಳನ್ನು ಕೊಡಬೇಕು ಎಂದು ಜನರು ಅಭಿಪ್ರಾಯ ಪಟ್ಟರು. ಅದರಂತೆ ಆ ಹೆಣ್ಣುಮಗಳನ್ನು ನಾಗೇಂದ್ರನ ಬೆನ್ನುಹಚ್ಚಿ ಬಿಟ್ಟರು.

ಭಾರಂಗ ಭಾವಿಯಲ್ಲಿ ಒಂದು ವಿಶಾಲವಾದ ಮನೆಯಿತ್ತು ನಾಗೇಂದ್ರನು ಅವಳಿಗೆ ಯಾವರೀತಿಯಿಂದಲೂ ಕೊರತೆ ಮಾಡಲಿಲ್ಲ. ವರುಷ ತುಂಬುವಷ್ಟರಲ್ಲಿ ಅವಳಿಗೊಂದು ಗಂಡುಮಗು ಹುಟ್ಟಿತು. ನಾಗೇಂದ್ರ ಅವಳಿಗೆ ಹೇಳಿದನು "ಹಾಲನ್ನು ಸಳಮಳನೆ ಕುದಿಸಿ ಕಬ್ಬಿಣ ಬುಟ್ಟಿಗೆ ಹೊಯ್ಯು. ನಾನು ಮೇಯಲಿಕ್ಕೆ ಹೋಗುತ್ತೇನೆ. ಹೊರಗಿನಿಂದ ನಾನು ಬಂದ ಕೂಡಲೇ ಬಾವಿಯ ಹತ್ತಿರ ಗಂಟೆ ಘಣ್‌ ಅನ್ನುತ್ತದೆ. ಆಗ ಹಾಲು ತಂದು ಹೊರಗಿಟ್ಟು ತಟ್ಟೆ ಮುಚ್ಚಿಬಿಡು"

ಈ ರೀತಿಯಾಗಿ ಆಕೆ ನಾಗೇಂದ್ರನ ಸೇವೆ ಮಾಡುತ್ತ ಇದ್ದಳು. ಆಕೆಯ ತಮ್ಮನೊಬ್ಬನು ಚಂಡು ತಕ್ಕೊಂಡು ಹೊರಗೆ ಆಡಲಿಕ್ಕೆ ಹೋದಾಗ ಆ ಚೆಂಡು ಹಿರಿಯ ಹೆಣ್ಣುಮಗಳ ಕೊಡಕ್ಕೆ ಬಡಿದು ಕೊಡ ಒಡೆದು ಹೋಯಿತು. ಹೀಗೆ ಮಾಡುವೆಯೆಂದೇ ನಿಮ್ಮಕ್ಕನನ್ನು ನಾಗೇಂದ್ರನು ಒಯ್ದಿದ್ದಾನೆ—ಎಂದು ಆಕೆ ಹಂಗಿಸಿದಳು. ಹುಡುಗನು ಮನೆಗೆ ಬಂದು "ಅವ್ವಾ, ಅವ್ಚಾ, ನಮ್ಮಕ್ಕನನ್ನು ನಾಗೇಂದ್ರ ಒಯ್ದಿದ್ದಾನಂತೆ. ನಮ್ಮಕ್ಕನನ್ನು ನೋಡಲಿಕ್ಕೆ ನಾನು ಹೋಗಲೇಬೇಕು" ಎಂದನು ತಾಯಿಗೆ.

"ನೀನೊಬ್ಬನೇ ಮಗ ನಮಗೆ. ನೀನೂ ಒಬ್ಬ ಹೋಗಿಬಿಟ್ಟರೆ ಹೇಗಪ್ಪ"

ಎಂದು ತಾಯಿ ಪರಿಪರಿಯಿಂದ ಬೇಡಿಕೊಂಡರೂ ಅವನು ಹೋಗಿಯೇಬಿಟ್ಟನು.

ಭಾರಂಗ ಬಾವಿಗೆ ಹೋದನು. ಗಂಟೆ ಗಣ್‌ ಅಂದಿತು. ಹಾಲನ್ನು ಕಬ್ಬಿಣ ಬುಟ್ಟಿಯಲ್ಲಿಟ್ಟು ಓಡಿಹೋಗಿ ತಟ್ಟಿಮುಚ್ಚಿಕೊಂಡಳು. "ಅಕ್ಕಾ! ಅಕ್ಕಾ! ಎಂದು ಹುಡುಗನು ಕೂಗಹತ್ತಿದನು. ಹೆಣ್ಣುಮಗಳು ಬಂದು ತಟ್ಟೆತೆರೆದು ಕೇಳಿದಳು "ತಮ್ಮಾ ನೀನೇಕೆ ಬಂದಿ? ಇಷ್ಟರಲ್ಲಿ ನಾಗೇಂದ್ರ ಬಂದರೆ ನಿನ್ನನ್ನು ಕೊಂದು ಹಾಕುತ್ತಾನೆ" ಎಂದಳು ಅಕ್ಕ.

"ನಿನ್ನ ಭೆಟ್ಟಿಯಾಗುವದಕ್ಕೆ ನಾನು ಬಂದಿದ್ದೇನೆ" ತಮ್ಮನ ಹೇಳಿಕೆ.

"ಬಂದರೆ ಒಳ್ಳೆಯದಾಯಿತು. ಈಗ ಲಗೂನೇ ಇಲ್ಲಿಂದ ಹೋಗು?" ಎಂದು ಅಕ್ಕ ದುಂಬಾಲ ಬಿದ್ದಳು.

ಅಷ್ಟರಲ್ಲಿ ನಾಗೇಂದ್ರ ಅಲ್ಲಿಗೆ ಬಂದನು. ಗಂಟೆ ಗಣ್‌ ಅಂದಿತು. ಹಾಲನ್ನು ಕಬ್ಬಿಣ ಬುಟ್ಟಿಯಲ್ಲಿ ಹಾಕಿ ತಟ್ಟೆ ಮುಚ್ಚಿಕೊಳ್ಳುವಷ್ಟರಲ್ಲಿ ನಾಗೇಂದ್ರ ಕೇಳುತ್ತಾನೆ. - "ಯಾರೋ ಬಂದಂತೆ ಕಾಣುತ್ತದೆ." "ನನ್ನ ತಮ್ಮ" ಎಂದು ಹೆಣ್ಣುಮಗಳು