ಪುಟ:Mysore-University-Encyclopaedia-Vol-6-Part-1.pdf/೩೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

ಗಣಪತಿ ಋಗ್ವೇದದಲ್ಲಿ ಗಣಾನಾಂ ತ್ವಾ ಗಣಪತಿಂ ಹವಾಮಹೇ ಎಂಬ ಋಕ್ಕು ಇದ್ದು ಇದ ಗಣಪತಿಯ ಪೂಜೆಯ ಮುಖ್ಯಮಂತ್ರವಾಗಿ ಇಂದಿಗೂ ಪುರಸ್ಕೃತವಾಗಿದೆಯಾದರೂ ವಿದ್ವಾಂಸರು ಇಲ್ಲಿನ ಗಣಪತಿ ಶಬ್ದಕ್ಕೆ ಬೃಹಸ್ಪತಿ ಅಥವಾ ಬ್ರಹ್ಮಣಸ್ಪತಿಯೆಂದೇ ಅರ್ಥಮಾಡುತ್ತಾರೆ. ನಮಗೆ ಇಂದು ಪ್ರಸಿದ್ಧವಿರುವ ಗಣಪತಿಯ ಮೂರ್ತಿಕಲ್ಪನೆ ಪುರಾಣಕಾಲದ್ದು. ಪುರಾಣಗಳಿಗೂ ಪೂರ್ವದ ಋಗ್ವೇದದಲ್ಲಿ ಆನೆಯ ಮುಖ, ಇಲಿಯ ವಾಹನ, ದೊಡ್ಡ ಹೊಟ್ಟೆ ಮುಂತಾದ ಯಾವ ಪೌರಾಣಿಕ ಕಲ್ಪನೆಗಳೂ ಇಲ್ಲ. ಆತ ಕೇವಲ ವಾಗಭಿಮಾನಿಯಾದ ಮತ್ತೊಬ್ಬ ದೇವನಂತೆ ತೋರುತ್ತಾನೆ. ಅಷ್ಟೇ ಅಲ್ಲದೆ ಇಡೀ ರಾಮಾಯಣದಲ್ಲಿ ಹಾಗು ಮಹಾಭಾರತದ ಮೂಲರೂಪದಲ್ಲಿ ಗಣಪತಿಯ ನಾಮಸ್ಮರಣೆ ಕೂಡ ಬಾರದು. ಕಾಳಿದಾಸನಿಗೆ ಸಹ ಗಣಪತಿಯ ಅರಿವಿದ್ದಂತೆ ಕಾಣಿಸುವುದಿಲ್ಲ. ಮಹಾಭಾರತವನ್ನು ಬರೆಯಲು ವ್ಯಾಸರು ಗಣೇಶನನ್ನು ಲಿಪಿಕಾರರನ್ನಾಗಿ ಮಾಡಿಕೊಂಡ ಕಥೆ ಈಚೆಗೆ ಮಹಾಭಾರತಕ್ಕೆ ಯಾರೋ ಸೇರಿಸಿದ್ದಂತೆ ವಿದ್ವಾಂಸರು ಭಾವಿಸುತ್ತಾರೆ. ಈ ಕೆಲವು ಕಾರಣಗಳಿಂದ ಗಣಪತಿ ಆರ್ಯರ ದೇವತೆಯಾಗಿರದೆ ಮೊಟ್ಟಮೊದಲಿಗೆ ದ್ರಾವಿಡ ಜನಾಂಗಗಳ ಗ್ರಾಮಭಿಮಾನಿ ದೇವತೆಯಾಗಿದ್ದಿರಬಹುದೆಂದು ಕೆಲವರು ಸಂಶೋಧಕರೂ ಊಹಿಸುತ್ತಾರೆ. ಕಾಲಾಂತರದಲ್ಲಿ ಈ ಕ್ಷುದ್ರ ದೇವತೆಯನ್ನು ಸಂಸ್ಕರಿಸಿಕೊಂಡು ಆರ್ಯರು ತಮ್ಮ ದೇವತಾವರ್ಗದಲ್ಲಿ ಸೇರಿಸಿ ಕೊಂಡಿರಬಹುದೆಂದು ಅವರ ಅಭಿಪ್ರಾಯ. ಆದರೆ ಈ ವಾದವನ್ನು ಒಪ್ಪದ ಸಂಶೋಧಕರು ಉಂಟು. ಅವರು ಹೇಳುವ ಕಾರಣಗಳಿವು: ಯಜುರ್ವೇದದ ತೃತ್ತೀರಿಯ ಸಂಹಿತೆಯಲ್ಲಿ ನಮೋ ಗಣೇಭ್ಯೋ ಗಣಪತಿಭ್ಯಶ್ಚವೋ ನಮಃ (೫-೪-೧) ಎಂಬ ಮಂತ್ರದಲ್ಲಿ ಅನೇಕ ಗಣಪತಿಗಳ ಉಲ್ಲೇಖವಿದೆ. ಅತ್ಯಂತ ಪ್ರಾಚೀನವಾದ (ಪ್ರ.ಶ.ಪೂ.ಸು. ೪ನೆಯ ಶತಮಾನದ) ಮಾನವಗೃಹ್ಯಸೂತ್ರದಲ್ಲಿ ವಿನಾಯಕರ ಸಂಖ್ಯೆ ನಾಲ್ಕೆಂದಿರುವುದಲ್ಲದೆ ಇವರ ಹೆಸರು ಕ್ರಮವಾಗಿ ಸಾಲಕಟಂಟಕ. ಕೂಶ್ಮಾಂಡ, ರಾಜಪುತ್ರ ಉಸ್ಮಿತ, ಮತ್ತು ದೇವಯಜನ ಎಂಬುದನ್ನು ತಿಳಿಸಿ ಇವರ ಪೀಡಾಪರಿಹಾರಕ್ಕೆ ಶಾಂತಿ ಕರ್ಮಗಳನ್ನು ವಿಧಿಸಿದೆ. ಮುಂದೆ ಯಾಜ್ಞವಲ್ಕ್ಯ ಸ್ಕೃತಿಯಲ್ಲಿ ಈ ವಿನಾಯಕರ ತಾಯಿ ಅಂಬಿಕೆಯೆಂದೂ ಇವರನ್ನು ತೃಪ್ತಿಪಡಿಸದೆ ಪೀಡೆಪರಿಹಾರವಾಗದೆಂದೂ ಹೇಳಿದೆ. ಪ್ರಸಕ್ತಶಕಾರಂಭದಲ್ಲಿ ರಚಿತವಾದ ಬೋಧಾಯನ ಗೃಹ್ಯಸೂತ್ರ ಗೋಭಿಲಸ್ಕೃತಿಗಳಲ್ಲಿಯೂ ಹಾಲನ (ಸಾತವಾಹನ) ಗಾಥಾ ಸಪ್ತಶತಿಯಲ್ಲಿಯೂ ಗಜಮುಖನ ಉಲ್ಲೇಖದಂತೆ ಅವನ ಅಗ್ರಪೂಜಾರ್ಹತೆಯೂ ನಿರ್ದಿಷ್ಟವಾಗಿವೆ. ಬಾಣಭಟ್ಟ, ಭವಭೂತಿಗಳು ಗಣಪತಿಯ ಸ್ತೋತ್ರ ಮಾಡಿದ್ದಾರೆ. ಹೀಗೆ ಗಣಪತಿಯ ಅತ್ಯಂತ ಪ್ರಾಚೀನ ಸ್ವರೂಪ ಸಂಶಯಾಪ್ನಾಗಿದ್ದರೂ ಅದು ಪ್ರಶ. ಆರನೆಯ ಶತಮಾನದ ವೇಳೆಗೆ ಇಂದು ಪ್ರಸಿದ್ಧವಾಗಿರುವ ಸ್ವರೂಪಕ್ಕೆ ಬಂದು ಮುಟ್ಟಿಯಾಗಿತ್ತೆಂದು ಊಹಿಸಬಹುದು. ಏಕೆಂದರೆ ಈದೇ ಕಾಲದ ಪ್ರಾಚೀನ ಶಿಲಾಮೂರ್ತಿಗಳು ಕೂಡ ಜೋಧಪುರದ ಬಳಿ ಘಾಟಿಯಾ, ಐಹೊಳೆ ಹಾಗು ಬಾದಾಮಿ ದೇವಾಲಯಗಳಲ್ಲಿ ಈಗಲೂ ಕಾಣಸಿಗುತ್ತವೆ. ಗಣಪತಿಯ ಮಹಿಮೆಯನ್ನು ವಿಸ್ತಾರವಾಗಿ ಪ್ರತಿಪಾದಿಸುವ ಪುರಾಣಗಳೂ ಇಲ್ಲಿಂದ ಮುಂದೆ ರಚಿತವಾದುವೆಂದು ಊಹಿಸಬಹುದು. ಪುರಾಣಗಳ ಪ್ರಕಾರ ಗಣಪತಿ ಶಿವ ಪಾರ್ವತಿಯವರ ಮಗ. ಕೇವಲ ಪಾರ್ವತಿಯ ಮುದ್ದುಮಗನೆನ್ನುವುದೇ ಹೆಚ್ಚು ಸಮಪರ್ಕ ವೆನೆಸುತ್ತದೆ. ಏಕೆಂದರೆ ಅವಳ ಸ್ನಾನಚೂರ್ಣದಿಂದ ಈತ ಮೈದಾಳಿ, ಅವಳ ಸ್ನಾನಜಲದೊಂದಿಗೆ ಗಂಗಾಮುಖವನ್ನು ಸೇರಿ. ಅಲ್ಲಿ ಗಜಮುಖಳಾದ ಮಾಲಿನಿಯೆಂಬ ದೇವತೆಯ ಗರ್ಭವನ್ನು ಸೇರಿ ಚತುರ್ಭುಜ ಮತ್ತು ಪಂಚಗಜಮುಖಗಳಿಂದ ಜನಿಸಿದನಂತೆ. ಗಂಗೆ ಅವನನ್ನು ತನ್ನ ಸುತನೆಂದರೂ ಶಿವ ಅವನನ್ನು ಪಾರ್ವತಿಸುತನೆಂದೂ ತೀರ್ಮಾನಿಸಿ ಅವನನ್ನು ಏಕಮುಖನನ್ನಾಗಿ ಮಾಡಿದನಂತೆ. ಅಂಜನಗಿರಿಯಲ್ಲಿ ಅವನನ್ನು ವಿಘ್ನವಿನಾಶಕ ದೇವನೆಂದು ಈಶ್ವರ ಪಟ್ಟಗಟ್ಟಿದನಂತೆ. ಈ ವಿವರಗಳು ಕಾಶ್ಮೀರಕವಿಯಾದ ಜಯರಥನ ಹರಚರಿತ ಚಿಂತಾಮಣಿಯಲ್ಲಿ (೧೩ನೆಯ ಶತಮಾನ) ದೊರೆಯುತ್ತದೆ. ಬ್ರಹ್ಮವೈವರ್ತ ಪುರಾಣದಲ್ಲಿ ಗಣೇಶನ ಜನ್ಮವೃತ್ತಾಂತ ವಿಸ್ತಾರವಾಗಿ ಬಂದಿದೆ. ಅಲ್ಲಿಯ ಕಥೆ ಬೇರೆ ರೀತಿಯಾಗಿದೆ. ಪಾರ್ವತಿ ತನ್ನ ಕಂದನನ್ನು ತೋರಿಸಲು ಎಲ್ಲರೊಂದಿಗೆ ಶನಿಯನ್ನೂ ಕರೆಸಿದ್ದಳಂತೆ. ಶನಿಯ ವಕ್ರದೃಷ್ಟಿ ಬಿದ್ದೊಡನೆ ಗಣಪತಿಯ ತಲೆ ಬಿದ್ದು ಹೋಯಿತಂತೆ. ಆಮೇಲೆ ವಿಷ್ಣು ಅವನಿಗೆ ಆನೆಯ ತಲೆಯನ್ನು ತಂದು ಅಂಟಿಸಿದನಂತೆ. ಗಣೇಶನಿಗೆ ಇರುವುದು ಒಂದೇ ದಂತ. ಇನ್ನೊಂದು ದಂತ ಕಳೆದು ಹೇಗೆನ್ನಲು ಬೇರೆ ಬೇರೆ ಕಥೆಗಳಿವೆ. ಅದನ್ನು ರಾವಣ ಮುರಿದನೆಂದು ಮಾಘಕವಿ (ಶಿಶುಪಾಲವಧ) ಹೇಳಿದರೆ, ಪರಶುರಾಮನೊಡನೆ ಯುದ್ಧದಲ್ಲಿ ಅದು ಮುರಿಯಿತೆಂದು ಬ್ರಹ್ಮವೈವರ್ತಪುರಾಣ ತಿಳಿಸುತ್ತದೆ. ಯಾರು ಜನವನ್ನೆಲ್ಲ ಬೇಗ ಪ್ರದಕ್ಶಿಣ ಮಾಡುವರೆಂದು ಗಣೇಶನಿಗೂ ಕುಮಾರಸ್ವಾಮಿಗೂ ಸ್ಪರ್ಧೆ ಬಂದ ಕಾಲದಲ್ಲಿ ದಂತ ಮುರಿಯಿತೆಂದು ಹರಚರಿತಚಿಂತಾಮಣಿಯಲ್ಲಿ ಹೇಳಲಾಗಿದೆ. ಶಿವ ಪುರಾಣದ ಪ್ರಕಾರ ಶಿವನೇ ಪಾರ್ವತಿಯ ಸ್ನಾನಗೃಹದ ಬಾಗಿಲಲ್ಲಿ ಕಾವಲಿದ್ದ ಗಣೇಶನ ತಲೆಯನ್ನು ಕಡಿದು ಅದಕ್ಕೆ ಬದಲಾಗಿ ಆನೆಯ ತಲೆಯನ್ನು ಜೋಡಿಸಿದನೆನ್ನಲಾಗಿದೆ. ಗಣಪತಿಗೆ ಮದುವೆಯೇ ಇಲ್ಲವೆನ್ನುವ ಕೆಲವು ಪುರಾಣಗಳಿದ್ದರೆ, ಅವನಿಗೆ ಸಿದ್ಧಿ, ಬುದ್ಧಿ ಎಓಬ ಇಬ್ಬರು ಹೆಂಡಿರನ್ನು ಹೇಳುವ ಪುರಾಣಗಳುಂಟು; ಸಿದ್ಧಿಯಲ್ಲಿ ಹುಟ್ಟಿದ ಕ್ಷೇಮ ಮತ್ತು ಬುದ್ಧಿಯಲ್ಲಿ ಹುಟ್ಟಿದ ಲಾಭ ಎಂಬ ಮಕ್ಕಳನ್ನು ಹೇಳುವ ಪುರಾಣಗಳೂ ಉಂಟು. ಗಣಪತಿಯ ವಿಗ್ರಹಗಳಲ್ಲಿ ಕೆಲವು ಇಂದಿನ ಸುಂದರರಾಕೃತಿಯ ಬದಲು ಒರಟು ವಿಕಾರರೂಪದಲ್ಲಿ ಯೂ ಇರುವುದನ್ನು ಕಾಣುತ್ತೇವೆ (ಉದಾ: ನಾಸಿಕದ ಮೋದಕೇಶ್ವರ ಗಣಪತಿ, ವಾರ್ಡದ ಸ್ವಯಂಭೂ ಗಣಪತಿ). ಕೆಲವು ಕೇವಲ ಸ್ಥೂಲ ಆನೆಯ ತಲೆಯಂತಿರುವ ಕಲ್ಲುಗಳೇ ಇರುತ್ತವೆ.(ಉದ: ಜುನ್ನಾರದ ಸಾರ್ವಜನಿಕ ಗಣಪತಿ). ಕೆಲವೆಡೆ ದ್ವಿಭುಜ ಗಣಪತಿಗಳಿವೆ (ಉದಾ: ಗೋಕರ್ಣ ಮತ್ತು ಇಡಗುಂಜಿಯ ಮೂರ್ತಿಗಳು). ಪಲ್ಲವರ ಕಾಲಕ್ಕೆ ಮುಂಚೆ ದಕ್ಷಿಣದಲ್ಲಿ ಗಣಪತಿ ವಿಗ್ರಹಗಳು ಸಿಕ್ಕಿಲ್ಲ. ಮುಂದೆ ಅನೇಕ ತಂತ್ರ ಆಗಮಗಳು ನಿರ್ದೇಶನದಂತೆ ಗಣಪತಿಯ ಮೂರ್ತಿ ಕಲ್ಪನೆಯಲ್ಲೂ ನಾನಾಭುಜಗಳು, ಅಲಂಕಾರಗಳು ಬೆಳೆದು ಬಂದುದನ್ನು ನೋಡಬಹುದು. ಹೊಯ್ಸಳರ ಕಾಲದಿಂದೀಚೆಗೆ ಈ ಪರಿಷ್ಕೃತ ರೂಪಗಳು ಕನ್ನಡ ನಾಡಿನಲ್ಲೆಲ್ಲ ಕಾಣಬರುತ್ತವೆ. ಭಾರತದಲ್ಲಿ ಮಾತ್ರವೇ ಅಲ್ಲ, ಪ್ರಾಚೀನ ಭಾರತೀಯರು ತಮ್ಮ ಸಂಸ್ಕೃತಿಯನ್ನು ಹರಡಿದ ಸಾಗರೋತ್ತರ ದೇಶಗಳಲ್ಲಿ ಕೂಡ ಗಣಪತಿವಿಗ್ರಹಗಳು ಜನಪ್ರಿಯವಾಗಿದ್ದುವು. ಜಾವ, ಕಾಂಬೋಡಿಯ, ಬೋರ್ನಿಯೊ ಮೊದಲಾದ ಆಗ್ನೇಯ ಏಷ್ಯ ರಾಷ್ಟ್ರಗಳಲ್ಲಿ ಹಿಂದೂ ಸಂಪ್ರದಾಯದ ಗಣಪತಿಯಿದ್ದರೆ, ಚೀನ, ಜಪಾನ್, ಸಿಂಹಳಗಳಲ್ಲಿ ಬೌದ್ಧರ ಪ್ರಭಾವದಿಂದ ಮಾರ್ಪಟ್ಟ ರೂಪದಲ್ಲಿ ಗಣಪತಿ ವಿಗ್ರಹಗಳು ಇಂದಿಗೂ ಕಾಣಸಿಗುತ್ತವೆ.

ಈಗ ಕೇವಲ ಗಣಪತಿಯೊಬ್ಬನನ್ನೇ ಪರಮ ದೈವತವೆಂದು ಭಜಿಸುವ ಹಿಂದೂ ಸಂಪ್ರದಾಯ ಎಲ್ಲಿಯೂ ಹೆಚ್ಚಾಗಿ ಕಾಣದಿದ್ದರೂ ಪ್ರಾಚೀನ ಭಾರತದಲ್ಲಿ ಅಂಥ ಒಂದು ಸಂಪ್ರದಾಯ ಊರ್ಜಿತದಲ್ಲಿದ್ದುದು ಸ್ಪಷ್ಟವಾಗಿ ಕಾಣಬರುತ್ತದೆ. ಅದಕ್ಕೆ ಗಾಣಾಪತ್ಯ ಸಂಪ್ರದಾಯವೆಂದು ಹೆಸರಿದ್ದಿತು. ಆನಂದಗಿರಿಯ ಶಂಕರವಿಜಯವೆಂಬ ಗ್ರಂಥದಲ್ಲಿ (ಪ್ರಾಯಃ ೧೦ನೆಯ ಶತಮಾನಕ್ಕಿಂತ ಇನ್ನೂ ಎಷ್ಟೋ ಈಚಿನ ಗ್ರಂಥ) ಗಾಣಾಪತ್ಯರ ಆರು ಪಂಥಗಳನ್ನು ಉಲ್ಲೇಖಿಸಲಾಗಿದೆ: ೧. ಮಾಹಾಗಣಪತಿ; ೨.ಹರಿದ್ರಾ ಗಣಪತಿ; ೩.ಉಚ್ಛಿಷ್ಟ ಗಣಪತಿ; ೪. ನವನೀತ ಗಣಪತಿ; ೫. ಸ್ವರ್ಣ ಗಣಪತಿ ಮತ್ತು ೬. ಸಂತಾನ ಗಣಪತಿ. ಈ ದೇವತೆಗಳ ಅವಾಹನಾಮಂತ್ರ ಹಾಗೂ ಪೂಜಾ ವಿಧಿಗಳಲ್ಲಿ