74
ಬಿಂಬಾಲಿಯ ಅದೃಷ್ಟ
ಒಬ್ಬ ಒಕ್ಕಲಿಗನಿಗೆ ತಿಮ್ಮಣ್ಣನೆಂಬ ಒಬ್ಬ ಮಗ. ಬಿಂಬಾಲಿ ಎಂಬ ಮಗಳು ಇದ್ದರು. ಆ ಅಣ್ಣತಂಗಿಯರು ತಮ್ಮ ತೋಟದಲ್ಲಿ ಗೊಂಡೆ ಹೂವಿನ ಗಿಡಗಳನ್ನು ಎರಡು ಸಾಲಿನಲ್ಲಿ ಬೆಳೆಸಿದ್ದರು. ಅಣ್ಣನು ನೆಟ್ಟಗಿಡಗಳಲ್ಲಿ ಹೆಣ್ಣು ಹೂಗಳೂ, ತಂಗಿಯು ನೆಟ್ಟ ಗಿಡಗಳಲ್ಲಿ ಗಂಡು ಹೂಗಳೂ ಅರಳಿದವು. ಹೆಣ್ಣು ಹೂವುಗಳೇ ಸುಂದರವಾಗಿರುವುದರಿಂದ ಅವುಗಳನ್ನೇ ಹೆಚ್ಚಾಗಿ ಮುಡಿಯುವರು.
ತನ್ನ ಗಿಡದೊಳಗಿನ ಗೊಂಡೆಹೂಗಳನ್ನು ಮುಡಿದವಳನ್ನೇ ತಾನು ಮದುವೆಯಾಗುವೆನೆಂದು ತಿಮ್ಮಣ್ಣನ ಹೂಣಿಕೆ.
ತಿಮ್ಮಣ್ಣನು ಗಾಳ ತೆಗೆದುಕೊಂಡು ಮೀನು ಹಿಡಿಯಲು ಹೊಳೆಗೆ ಹೋದಾಗ ಬಿಂಬಾಲಿಯು, ಅಣ್ಣನ ಗೊಂಡೆಗಳನ್ನು ಹರಿದು, ದಂಡೆಕಟ್ಟಿ ಮುಡಿಯಬೇಕೆಂದು ಹೊಳೆಯ ಮೇಲ್ಭಾಗದಲ್ಲಿಳಿದು ಮಿಂದಳು. ತಲೆಗೂದಲನ್ನು ತಿಕ್ಕಿ ತೊಳೆಯುವಾಗ ಒಂದೆರಡು ಎಳೆಗಳು ನೀರಲ್ಲಿ ಹರಿದುಹೋಗಿ, ತಿಮ್ಮಣ್ಣನ ಗಾಳಕ್ಕೆ ಸಿಕ್ಕಿದವು. ಆ ಕೂದಲೆಳೆಗಳನ್ನು ತೆಗೆದುಕೊಂಡು ನೋಡಿದರೆ ಅವು ನೀಳವಾಗಿದ್ದವು ; ಚಿನ್ನದಂತೆ ತಳತಳಿಸುತ್ತಿದ್ದವು. ಈ ಚಿನ್ನದ ಕೂದಲಿನವಳು ತನ್ನ ಮಡದಿಯಾಗಬೇಕೆಂದು ಇನ್ನೊಂದು ಪ್ರತಿಜ್ಞೆಮಾಡಿದನು.
ಮೀನು ಹಿಡಿದುಕೊಂಡು ತಿಮ್ಮಣ್ಣನು ಮನೆಗೆ ಬರುವಷ್ಟರಲ್ಲಿ ಬಿಂಬಾಲಿಯು, ಅಣ್ಣನು ನೆಟ್ಟ ಗಿಡಗಳೊಳಗಿನ ಗೊಂಡೆ ಹೂಗಳಿಂದ ದಂಡೆಕಟ್ಟಿಟ್ಟು, ಅದನ್ನು ಮುಡಿಯಬೇಕೆಂದು ತಲೆಗೆ ಎಣ್ಣೆ ಸವರಿ ಬಾಚಿಕೊಳ್ಳುತ್ತಿದ್ದಳು. ಅದನ್ನು ಕಂಡು ತಿಮ್ಮಣ್ಣ ನೇರವಾಗಿ ತಾಯ ಬಳಿಗೆ ಹೋದನು.
ಅಣ್ಣನ ಪ್ರತಿಜ್ಞೆ ತನಗೆ ಗೊತ್ತಿದ್ದರೂ, ಆತನ ಪ್ರತಿಜ್ಞೆ ತನಗೆ ಬಾಧಕವಲ್ಲ ಎಂದು ಭಾವಿಸಿಯೇ ಪ್ರೀತಿಯ ಗೊಂಡೆಹೂಗಳನ್ನು ಬಿಂಬಾಲಿ ಕೊಯ್ದಿದ್ದಳು.
``ಅವ್ವಾ, ನನ್ನ ಗೊಂಡೆಗಿಡದ ಹೂಗಳನ್ನು ಕೊಯ್ದವರಾರು ? ಎಂದು ಕೇಳಿದನು ತಿಮ್ಮಣ್ಣ. ``ಮತ್ತಾರೂ ಕೊಯ್ದಿಲ್ಲ. ನಿನ್ನ ತಂಗಿ ನಾಲ್ಕು ಹೂ ಕೊಯ್ದು ದಂಡೆಕಟ್ಟಿಕೊಂಡಿದ್ದಾಳೆ ಎಂದಳು ತಾಯಿ.