ಯಾರೂ ಸಂಗಡ ಬಾಹೋರಿಲ್ಲ

ವಿಕಿಸೋರ್ಸ್ದಿಂದ

ಯಾರೂ ಸಂಗಡ ಬಾಹೋರಿಲ್ಲ[ಸಂಪಾದಿಸಿ]

ರಾಗ: ಮೋಹನ, ತಾಳ: ಅಟ್ಟ,
ಯಾರೂ ಸಂಗಡ ಬಾಹೋರಿಲ್ಲ
ನಾರಾಯಣ ನಿಮ್ಮ ನಾಮ ಒಂದಲ್ಲದೆ ||ಪ||

ಹೊತ್ತು ನವಮಾಸ ಪರಿಯಂತರವು ಗರ್ಭದಲಿ
ಹೆತ್ತು ಬಲು ನೋವು ಬೇನೆಗಳಿಂದಲಿ
ತುತ್ತು ಬುತ್ತಿಯ ಕೊಟ್ಟು ಸಲಹಿದಂಥ ತಾಯಿ
ಅತ್ತು ಕಳುಹುವಳಲ್ಲದೆ ನೆರೆ ಬಾಹಳೆ || ೧||

ದೇವವಿಪ್ರರು ಅಗ್ನಿ ಸಾಕ್ಷಿಯಿಂದಲಿ ತನ್ನ
ಭಾವಶುದ್ಧಿಯಲಿ ಧಾರೆಯೆರೆಸಿಕೊಂಡ
ದೇವಿ ತನ್ನ ತಲೆಗೆ ಕೈಯಿಟ್ಟುಕೊಂಡು
ಇನ್ನಾವ ಗತಿಯಿಂದೆನುತ ಗೋಳಿಡುವಳಲ್ಲದೆ ||೨||

ಮತ್ತೆ ಪ್ರಾಣನು ತನುವ ಬಿಟ್ಟು ಹೋಗುವಾಗ
ಎತ್ತಿವನ ಹೊರಗೊಯ್ದು ಹಾಕೆಂಬರು
ಎತ್ತಿದ ಕಸಕ್ಕಿಂತ ಕಡೆಯಾಯಿತೀ ದೇಹ
ವಿತ್ತವೆಷ್ಟಿದ್ದರೂ ಫಲವಿಲ್ಲ ಹರಿಯೆ ||೩||

ಪುತ್ರ ಮಿತ್ರರು ಸಕಲ ಬಂಧು ಬಳಗಗಳೆಲ್ಲ
ಹತ್ತಿರ ನಿಂತು ನೋಡುವರಲ್ಲದೆ
ಮೃತ್ಯುದೇವಿಯು ಬಂದು ಅಸುಗಳನು ಸೆಳೆವಾಗ
ಮತ್ತೆ ತನ್ನವರಿದ್ದು ಏನು ಮಾಡುವರು ||೪||

ಯಮನು ದೂತರು ಬಂದು ಪಾಶಂಗಳನೆ ಎಸೆದು
ಮಮತೆಯಿಲ್ಲದೆ ಪ್ರಾಣ ಎಳೆಯುತಿರಲು
ವಿಮುಖನಾಗಿ ತಾನು ವ್ಯಥೆಯಿಂದ ಪೋಪಾಗ
ಕಮಲಾಕ್ಷ ಪುರಂದರವಿಠಲ ನೀನಲ್ಲದೆ ||೫|| [೧]
ರಚನೆ- ಪುರಂದರದಾಸರು.

ನೋಡಿ[ಸಂಪಾದಿಸಿ]

ಪರಿವಿಡಿ[ಸಂಪಾದಿಸಿ]

ಕನ್ನಡ ವಿಕಿಸೋರ್ಸ್[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ


ಉಲ್ಲೇಖ[ಸಂಪಾದಿಸಿ]

  1. ದಾಸವಾಣಿ